8
ಎಜ್ರನೊಂದಿಗೆ ಹಿಂದಿರುಗಿದ ನಾಯಕರು
ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ:
 
ಫೀನೆಹಾಸನ ಸಂತತಿಯವರಲ್ಲಿ ಗೇರ್ಷೋಮ್; ಈತಾಮಾರನ ಸಂತತಿಯವರಲ್ಲಿ ದಾನಿಯೇಲನು; ದಾವೀದನ ಸಂತತಿಯವರಲ್ಲಿ ಹಟ್ಟೂಷ್;
ಶೆಕನ್ಯನ ಸಂತತಿಯವರಲ್ಲಿ ಪರೋಷ್, ಜೆಕರ್ಯ ಮತ್ತು ಬೇರೆ ನೂರೈವತ್ತು ಮಂದಿ ಗಂಡಸರು;
ಪಹತ್‌ಮೋವಾಬ್ ಸಂತತಿಯವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೊವೇನೈ ಮತ್ತು ಇತರ ಇನ್ನೂರು ಮಂದಿ ಗಂಡಸರು;
ಜತ್ತೂವಿನ ಸಂತತಿಯವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯ ಮತ್ತು ಇತರ ಮುನ್ನೂರು ಮಂದಿ ಗಂಡಸರು;
ಆದಿನನ ಸಂತತಿಯವರಲ್ಲಿ ಯೋನಾತಾನನ ಮಗನಾದ ಎಬೆದ್ ಮತ್ತು ಇತರ ಐವತ್ತು ಮಂದಿ ಗಂಡಸರು;
ಏಲಾಮಿನ ಸಂತತಿಯವರಲ್ಲಿ ಅತಲ್ಯನ ಮಗನಾದ ಯೆಶಾಯ ಮತ್ತು ಬೇರೆ ಎಪ್ಪತ್ತು ಮಂದಿ ಗಂಡಸರು;
ಶೆಫಟ್ಯನ ಸಂತತಿಯವರಲ್ಲಿ ಮೀಕಾಯೇಲನ ಮಗನಾದ ಜೆಬದ್ಯ ಮತ್ತು ಬೇರೆ ಎಂಭತ್ತು ಮಂದಿ ಗಂಡಸರು;
ಯೋವಾಬನ ಸಂತತಿಯವರಲ್ಲಿ ಯೆಹೀಯೇಲನ ಮಗನಾದ ಓಬದ್ಯ ಮತ್ತು ಇನ್ನೂರ ಹದಿನೆಂಟು ಮಂದಿ ಬೇರೆ ಗಂಡಸರು;
10 ಬಾನೀಯ ಸಂತತಿಯವರಲ್ಲಿ ಯೋಸಿಫ್ಯನ ಮಗನಾದ ಶೆಲೋಮೀತ್ ಮತ್ತು ನೂರ ಅರವತ್ತು ಮಂದಿ ಇತರ ಗಂಡಸರು;
11 ಬೇಬೈಯ ಸಂತತಿಯವರಿಂದ ಬೇಬೈಯ ಮಗನಾದ ಜೆಕರ್ಯ ಮತ್ತು ಇಪ್ಪತ್ತೆಂಟು ಮಂದಿ ಇತರರು;
12 ಅಜ್ಗಾದನ ಸಂತತಿಯವರಿಂದ ಹಕ್ಕಾಟಾನನ ಮಗನಾದ ಯೋಹಾನಾನ್ ಮತ್ತು ಇತರ ನೂರಹತ್ತು ಮಂದಿ ಗಂಡಸರು;
13 ಅದೋನೀಕಾಮಾನ ಕೊನೆಯ ಸಂತತಿಯವರಿಂದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಮತ್ತು ಬೇರೆ ಅರವತ್ತು ಮಂದಿ ಗಂಡಸರು;
14 ಬಿಗ್ವೈಯ ಸಂತಿಯವರಲ್ಲಿ ಊತೈ, ಜಕ್ಕೂರ ಮತ್ತು ಎಪ್ಪತ್ತು ಮಂದಿ ಇತರ ಗಂಡಸರು.
ಮರಳಿ ಜೆರುಸಲೇಮಿಗೆ
15 ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ. 16 ಆಗ ನಾನು ಎಲಿಯೆಜರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ ಮತ್ತು ಮೆಷುಲ್ಲಾಮ್ ಎಂಬ ನಾಯಕರನ್ನು ಕರೆದೆನು. ಅಲ್ಲದೆ (ಬೋಧಕರುಗಳಾದ) ಯೋಯಾರೀಬ್ ಮತ್ತು ಎಲ್ನಾತಾನ್ ಎಂಬವರನ್ನು ಕರೆದು 17 ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು. 18 ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು. 19 ಅಲ್ಲದೆ ಮೆರಾರೀ ಸಂತತಿಯವರಾದ ಹಷಬ್ಯ ಮತ್ತು ಯೆಶಾಯ; ಇವರು ಸಹ ತಮ್ಮ ಸಹೋದರರನ್ನು ಮತ್ತು ಸಂಬಂಧಿಕರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ ಇಪ್ಪತ್ತು ಮಂದಿ ಗಂಡಸರಿದ್ದರು. 20 ಇನ್ನೂರಿಪ್ಪತ್ತು ಮಂದಿ ದೇವಾಲಯದ ಸೇವಕರು; (ಇವರ ಪೂರ್ವಿಕರು ದಾವೀದನ ಕಾಲದಲ್ಲಿ ಲೇವಿಯರಿಗೆ ಸಹಾಯಕರಾಗಿ ಆರಿಸಲ್ಪಟ್ಟವರಾಗಿದ್ದರು. ಅವರೆಲ್ಲರ ಹೆಸರುಗಳನ್ನು ಪಟ್ಟಿಮಾಡಲಾಗಿದೆ.)
21 ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು. 22 ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು. 23 ಹಾಗೆ ನಾವು ನಮ್ಮ ಪ್ರಯಾಣದ ಕುರಿತು ದೇವರಿಗೆ ಉಪವಾಸ ಪ್ರಾರ್ಥನೆ ಮಾಡಿದೆವು. ಆತನು ಅದನ್ನು ಅನುಗ್ರಹಿಸಿದನು.
24 ಆಮೇಲೆ ನಾನು ಯಾಜಕರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. ಅವರು ಶೇರೇಬ್ಯ, ಹಷಬ್ಯ ಮತ್ತು ಅವರ ಹತ್ತು ಮಂದಿ ಸಹೋದರರು. 25 ದೇವಾಲಯಕ್ಕೆ ಕೊಟ್ಟಿರುವ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಸ್ತುಗಳನ್ನು ನಾನು ತೂಗಿ ಆರಿಸಲ್ಪಟ್ಟಿದ್ದ ಹನ್ನೆರಡು ಮಂದಿಗೆ ಕೊಟ್ಟೆನು. ಅವುಗಳನ್ನು ಅರ್ತಷಸ್ತ ರಾಜನೂ ಅವನ ಸಲಹೆಗಾರರೂ ಉನ್ನತಾಧಿಕಾರಿಗಳೂ ಅಲ್ಲದೆ ಬಾಬಿಲೋನಿನಲ್ಲಿದ್ದ ಎಲ್ಲಾ ಇಸ್ರೇಲರು ದೇವಾಲಯಕ್ಕಾಗಿ ಕೊಟ್ಟಿದ್ದರು. 26 ನಾನು ಅವುಗಳನ್ನು ತೂಗಿದಾಗ ಇಪ್ಪತ್ತೆರಡು ಸಾವಿರದ ನೂರು ಕಿಲೋಗ್ರಾಂ ಬೆಳ್ಳಿಯೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿಪಾತ್ರೆಗಳೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬಂಗಾರವೂ ಇದ್ದವು. 27 ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ ಒಟ್ಟು ತೂಕ ಎಂಟುವರೆ ಕಿಲೋಗ್ರಾಂ ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು. 28 ಆ ಹನ್ನೆರಡು ಮಂದಿ ಯಾಜಕರಿಗೆ ನಾನು ಹೇಳಿದ್ದೇನೆಂದರೆ, “ನೀವು ಮತ್ತು ಈ ವಸ್ತುಗಳು ಯೆಹೋವನಿಗೆ ಪರಿಶುದ್ಧವಾದವುಗಳಾಗಿವೆ. ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಜನರು ಕಾಣಿಕೆ ಕೊಟ್ಟರು. 29 ಆದ್ದರಿಂದ ಭದ್ರವಾಗಿ ಇಟ್ಟುಕೊಳ್ಳಿರಿ. ಜೆರುಸಲೇಮಿನಲ್ಲಿರುವ ದೇವಾಲಯದ ಅಧಿಕಾರಿಗಳಿಗೆ, ಲೇವಿಯರಿಗೆ ಮತ್ತು ಇಸ್ರೇಲ್ ಕುಲಪ್ರಧಾನರಿಗೆ ಇವುಗಳನ್ನು ತಲುಪಿಸುವ ತನಕ ನೀವು ಇದಕ್ಕೆ ಜವಾಬ್ದಾರರಾಗಿದ್ದೀರಿ. ಅವರು ಇವುಗಳನ್ನು ತೂಗಿ ದೇವಾಲಯದ ಕೋಣೆಯಲ್ಲಿ ಭದ್ರವಾಗಿಡುವರು.”
30 ಎಜ್ರನು ತೂಕಮಾಡಿ ಕೊಟ್ಟ ಬೆಳ್ಳಿಬಂಗಾರಗಳನ್ನು ಮತ್ತು ಇತರ ವಿಶೇಷ ವಸ್ತುಗಳನ್ನು ಯಾಜಕರು ಮತ್ತು ಲೇವಿಯರು ಸ್ವೀಕರಿಸಿ ಜೆರುಸಲೇಮಿನಲ್ಲಿರುವ ದೇವಾಲಯಕ್ಕೆ ತಲುಪಿಸುವ ಜವಾಬ್ದಾರಿಕೆ ಹೊತ್ತರು.
31 ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು. 32 ಜೆರುಸಲೇಮಿಗೆ ಬಂದು ಮೂರು ದಿನ ವಿಶ್ರಾಂತಿ ತೆಗೆದುಕೊಂಡೆವು. 33 ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಚಾದನು ಮತ್ತು ಬಿನ್ನೂಯಿಯ ಮಗನಾದ ನೋವದ್ಯನು ಅವರ ಸಂಗಡ ಇದ್ದರು. 34 ನಾವು ಎಲ್ಲಾ ವಸ್ತುಗಳನ್ನು ತೂಗಿ ಪಟ್ಟಿಯಲ್ಲಿ ಬರೆದಿಟ್ಟೆವು.
35 ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.
36 ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.